

ಶಿವಮೊಗ್ಗ: ಅಕ್ರಮವಾಗಿ ಗೋಮಾಂಸ ಮಾರಾಟ ಮಾಡಲಾಗುತ್ತಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಶಿವಮೊಗ್ಗ (shivamogga )ನಗರದ ಬುದ್ಧನಗರ 1ನೇ ಕ್ರಾಸ್ ಬಳಿ ಪೊಲೀಸರು ದಾಳಿ ನಡೆಸಿ ಕೆ.ಜಿ.ಗಟ್ಟಲೆ ಮಾಂಸ ವಶಕ್ಕೆ ಪಡೆದಿದ್ದಾರೆ.
ಹಿಂದೂ ಜಾಗರಣಾ ವೇದಿಕೆ ಕಾರ್ಯಕರ್ತರಿಗೆ ಬುದ್ಧನಗರ ಪ್ರದೇಶದಲ್ಲಿ ಅಕ್ರಮವಾಗಿ ಗೋಮಾಂಸ ಮಾರಾಟ ಮಾಡಲಾಗುತ್ತಿದೆ ಎಂಬ ಮಾಹಿತಿ ಲಭ್ಯವಾಗಿತ್ತು ಎನ್ನಲಾಗಿದೆ.
ಇದನ್ನೂ ಓದಿ:-Shivamogga | ಗೋಡೌನ್ನಲ್ಲಿದ್ದ ಒಣ ಅಡಿಕೆ ಕಳ್ಳತನ ಪ್ರಕರಣ- ಐವರ ಬಂಧನ
ಈ ಕುರಿತು ಶಿವಮೊಗ್ಗ (shivamogga) ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ. ನಿಖಿಲ್ ಅವರಿಗೂ ಮಾಹಿತಿ ನೀಡಲಾಗಿತ್ತು ಎಂದು ಕಾರ್ಯಕರ್ತರು ತಿಳಿಸಿದ್ದಾರೆ.
ಆದರೆ, ಪೊಲೀಸರು ಸೂಕ್ತ ಕ್ರಮ ಕೈಗೊಂಡಿಲ್ಲ ಎಂಬ ಆರೋಪದ ಹಿನ್ನೆಲೆಯಲ್ಲಿ ಹಿಂಜಾವೇ ಕಾರ್ಯಕರ್ತರು ಇಂದು ಸ್ಥಳಕ್ಕೆ ತೆರಳಿ ದೂರದಿಂದ ಪರಿಶೀಲನೆ ನಡೆಸಿದ್ದಾರೆ. ಬಳಿಕ 112 ಪೊಲೀಸ್ ಸಹಾಯವಾಣಿಗೆ ಕರೆ ಮಾಡಿ ಅಕ್ರಮವಾಗಿ ಗೋಮಾಂಸ ಮಾರಾಟ ಮಾಡುತ್ತಿರುವ ಬಗ್ಗೆ ಮಾಹಿತಿ ನೀಡಿದ್ದಾರೆ.
ಮಾಹಿತಿ ಆಧರಿಸಿ ಸ್ಥಳಕ್ಕೆ ತೆರಳಿದ ಪೊಲೀಸರು ಅಕ್ರಮವಾಗಿ ಮಾಂಸ ಮಾರಾಟ ಮಾಡುತ್ತಿದ್ದ ಸ್ಥಳದ ಮೇಲೆ ದಾಳಿ ನಡೆಸಿದ್ದಾರೆ. ಈ ವೇಳೆ ಕೆ.ಜಿ.ಗಟ್ಟಲೆ ಗೋಮಾಂಸವನ್ನು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದುಬಂದಿದೆ.
ಘಟನೆ ಸಂಬಂಧ ಪೊಲೀಸರು ಸುಮೋಟೋ ಪ್ರಕರಣ ದಾಖಲಿಸಿಕೊಂಡಿದ್ದು, ಶಿವಮೊಗ್ಗದ ದೊಡ್ಡಪೇಟೆ ಠಾಣೆ ಪೊಲೀಸರು ತನಿಖೆ ಆರಂಭಿಸಿದ್ದಾರೆ.
ಅಕ್ರಮ ಗೋಮಾಂಸ ಮಾರಾಟದ ಆರೋಪಕ್ಕೆ ಸಂಬಂಧಿಸಿದಂತೆ ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದು, ವಶಪಡಿಸಿಕೊಂಡಿರುವ ಮಾಂಸದ ಕುರಿತು ಅಗತ್ಯ ಪರೀಕ್ಷೆ ಹಾಗೂ ಕಾನೂನು ಕ್ರಮ ಕೈಗೊಳ್ಳುವ ಸಾಧ್ಯತೆ ಇದೆ
