Uttara kannada| ಆರೆಂಜ್ ಅಲರ್ಟ್: ಭಾರೀ ಮಳೆ, ಬಿರುಗಾಳಿ ಸಾಧ್ಯತೆ.
ಕಾರವಾರ: ರಾಜ್ಯದಲ್ಲಿ ಮುಂಗಾರು ಚುರುಕುಗೊಂಡಿರುವ ಹಿನ್ನೆಲೆಯಲ್ಲಿ ಭಾರತೀಯ ಹವಾಮಾನ ಇಲಾಖೆ (IMD) ಬೆಂಗಳೂರು ಕೇಂದ್ರವು 23ರ ಬೆಳಿಗ್ಗೆ 8.30ರವರೆಗೆ ಮುಂದಿನ 24 ಗಂಟೆಗಳ ಅವಧಿಗೆ ರಾಜ್ಯದ ವಿವಿಧ ಜಿಲ್ಲೆಗಳಿಗೆ ಮಳೆ ಹಾಗೂ ಬಿರುಗಾಳಿಯ ಮುನ್ನೆಚ್ಚರಿಕೆ ನೀಡಿದೆ.
ಇದನ್ನೂ ಓದಿ:-Karwar | ಕಾರವಾರದ ಈ ಖದೀಮನಿಗೆ ಗೋವಾದಲ್ಲಿ 300 ಕೋಟಿ ಆಸ್ತಿ!
ಉತ್ತರ ಕನ್ನಡ ಜಿಲ್ಲೆಯಲ್ಲಿ 115.6 ಮಿ.ಮೀ.ದಿಂದ 204.5 ಮಿ.ಮೀ.ವರೆಗೆ ಅತಿ ಭಾರೀ ಮಳೆಯಾಗುವ ಸಾಧ್ಯತೆ ಇರುವುದರಿಂದ ಜಿಲ್ಲೆಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಜೊತೆಗೆ ಗಂಟೆಗೆ 30ರಿಂದ 40 ಕಿ.ಮೀ. ವೇಗದಲ್ಲಿ ಬಲವಾದ ಗಾಳಿ ಬೀಸುವ ಸಾಧ್ಯತೆಯಿದ್ದು, ನದಿ, ತಗ್ಗು ಪ್ರದೇಶಗಳು ಹಾಗೂ ಗುಡ್ಡ ಪ್ರದೇಶಗಳ ನಿವಾಸಿಗಳು ಅಗತ್ಯ ಮುನ್ನೆಚ್ಚರಿಕೆ ವಹಿಸುವಂತೆ ಇಲಾಖೆ ಸೂಚಿಸಿದೆ.
ದೇವಿಮನೆ ಘಟ್ಟದಲ್ಲಿ ಮತ್ತೆ ಗುಡ್ಡ ಕುಸಿಯುವ ಎಚ್ಚರಿಕೆ.
ಇನ್ನು ದೇವಿಮನೆ ಘಟ್ಟ ಭಾಗದಲ್ಲಿ ಹಲವು ಕಡೆ ಮಣ್ಣು ಸಡಿಲವಾಗಿದ್ದು ,ಮತ್ತೆ ಗುಡ್ಡ ಕುಸಿಯುವ ಆತಂಕವಿದೆ. ಹೆಚ್ಚಿನ ಮಳೆಯಾದರೇ ಸಣ್ಣ ಪ್ರಮಾಣದಲ್ಲಿ ಮಣ್ಣು ಜರಿಯುವ ಸಾಧ್ಯತೆಗಳಿದ್ದು ಈ ಹಿನ್ನಲೆಯಲ್ಲಿ ಇಲ್ಲಿ ಸಂಚರಿಸುವವರು ಎಚ್ಚರಿಕೆಯಿಂದ ಚಲಿಸಲು ಸೂಚಿಸಲಾಗಿದೆ.
ಇದನ್ನೂ ಓದಿ:-Kumta| ದೇವಿಮನೆ ಘಟ್ಟದಲ್ಲಿ ಭೂ ಕುಸಿತ -ಸ್ವಲ್ಪದರಲ್ಲೇ ಪಾರಾದ ಬೈಕ್ ಸವಾರ
ಇದೇ ವೇಳೆ ಕರಾವಳಿ ಹಾಗೂ ಮಲೆನಾಡಿನ ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ,(shivamogga) ಚಿಕ್ಕಮಗಳೂರು, ಕೊಡಗು ಮತ್ತು ಮೈಸೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ. ಈ ಭಾಗಗಳಲ್ಲಿ ಭಾರೀ ಮಳೆಯೊಂದಿಗೆ ಬಲವಾದ ಗಾಳಿ ಬೀಸುವ ಸಾಧ್ಯತೆ ಇದೆ.
ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಹಾವೇರಿ, ಗದಗ, ಬಾಗಲಕೋಟೆ, ವಿಜಯಪುರ, ಕಲಬುರಗಿ, ಯಾದಗಿರಿ, ಬೀದರ್, ರಾಯಚೂರು, ಕೊಪ್ಪಳ, ವಿಜಯನಗರ, ಬಳ್ಳಾರಿ ಹಾಗೂ ದಾವಣಗೆರೆ ಜಿಲ್ಲೆಗಳಲ್ಲೂ ಯೆಲ್ಲೋ ಅಲರ್ಟ್ ಘೋಷಿಸಲಾಗಿದ್ದು, ಗಂಟೆಗೆ 30ರಿಂದ 50 ಕಿ.ಮೀ. ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ.
ದಕ್ಷಿಣ ಒಳನಾಡಿನ ಚಿತ್ರದುರ್ಗ, ತುಮಕೂರು, ಹಾಸನ, ಮಂಡ್ಯ, ರಾಮನಗರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ ಹಾಗೂ ಚಾಮರಾಜನಗರ ಜಿಲ್ಲೆಗಳಲ್ಲಿ ಸಾಧಾರಣದಿಂದ ಹಗುರ ಮಳೆಯಾಗುವ ಸಾಧ್ಯತೆ ಇದ್ದು, ಈ ಭಾಗಗಳಿಗೆ ಯಾವುದೇ ವಿಶೇಷ ಅಲರ್ಟ್ ಘೋಷಿಸಲಾಗಿಲ್ಲ.
ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಸಾರ್ವಜನಿಕರು ಅನಗತ್ಯ ಸಂಚಾರವನ್ನು ತಪ್ಪಿಸಿ, ಹವಾಮಾನ ಇಲಾಖೆಯ ಅಧಿಕೃತ ಸೂಚನೆಗಳನ್ನು ಪಾಲಿಸುವಂತೆ ಅಧಿಕಾರಿಗಳು ಮನವಿ ಮಾಡಿದ್ದಾರೆ.
