ಕಾರವಾರ:-ಉತ್ತರ ಕನ್ನಡ ಜಿಲ್ಲೆಯ ಸಂಸದ ಅನಂತಕುಮಾರ್ ಹೆಗಡೆ ರವರು ಪರಿಷತ್ ಚುನಾವಣೆ ಸಂಬಂಧ ಜಿಲ್ಲೆಯ ಅಭ್ಯರ್ಥಿ ಘೋಷಣೆ ಆಗುತಿದ್ದಂತೆ ಅಭ್ಯರ್ಥಿ ಪರ ನಾಮಪತ್ರ ಸಲ್ಲಿಕೆಯಿಂದ ಹಿಡಿದು ಪ್ರಚಾರಕ್ಕೂ ಸಹ ಗೈರಾಗಿದ್ದು ಪಕ್ಷದಲ್ಲಿ ಸಾಕಷ್ಟು ಗೊಂದಲಕ್ಕೆ
ಕಾರಣವಾಗಿತ್ತು. ಇದರ ಜೊತೆಗೆ ಮಾಧ್ಯಮದಲ್ಲೂ ಸುದ್ದಿಯಾಗುತಿದ್ದಂತೆ ಇದೀಗ ಸಂಸದ ಅನಂತಕುಮಾರ್ ಹೆಗಡೆ ಸ್ಪಷ್ಟನೆ ನೀಡಿದ್ದಾರೆ.
ಸಂಸದ ಅನಂತಕುಮಾರ್ ಹೆಗಡೆ ಸ್ಪಷ್ಟನೆಯಲ್ಲಿ ಏನಿದೆ?
ವಿಧಾನ ಪರಿಷತ್ ಚುನಾವಣೆ ಘೋಷಣೆಯಾದಾಗಿನಿಂದ ಪೂರ್ವ ನಿಗದಿತ ಕಾರ್ಯಕ್ರಮಗಳಾದ ಬೆಂಗಳೂರು, ಮೈಸೂರು ಹಾಗೂ ತಮಿಳುನಾಡು ಪ್ರವಾಸದಲ್ಲಿದ್ದು, ಅದರಂತೆ ನವೆಂಬರ್ 29 ರಿಂದ ಸಂಸತ್ತಿನ ಚಳಿಗಾಲದ ಅಧಿವೇಶನ ಪ್ರಾರಂಭವಾಗಿದೆ. ಸಂಸತ್ತಿನ ಕಲಾಪಗಳಲ್ಲಿ ಭಾಗವಹಿಸುತ್ತಿರುವುದರಿಂದ ಅನಿವಾರ್ಯವಾಗಿ ಉತ್ತರ ಕನ್ನಡ ವಿಧಾನ ಪರಿಷತ್ ಚುನಾವಣೆಯ ಬಿಜೆಪಿ ಅಭ್ಯರ್ಥಿ ಗಣಪತಿ ಉಳ್ವೇಕರ್ ಪರವಾಗಿ ಮತ ಪ್ರಚಾರಕ್ಕೆ ಬರಲು ಸಾಧ್ಯವಾಗಿರುವುದಿಲ್ಲ. ಈಗಾಗಲೇ ಈ ವಿಷಯವನ್ನು ಜಿಲ್ಲೆಯ ಎಲ್ಲಾ ಮುಖಂಡರಿಗೂ ತಿಳಿಸಿದ್ದು, ಬಿಜೆಪಿ ಅಭ್ಯರ್ಥಿಯನ್ನು ಗೆಲ್ಲಿಸಲು ಪಕ್ಷದ ಮುಖಂಡರು ಸಾಮೂಹಿಕ ಜವಾಬ್ದಾರಿಯನ್ನು ಸ್ವೀಕರಿಸಲು ಸೂಚಿಸಿರುತ್ತೇನೆ.
ವಿಧಾನ ಪರಿಷತ್ ಅಭ್ಯರ್ಥಿ ಗಣಪತಿ ಉಳ್ವೇಕರ್ ಇವರ ಗೆಲುವು ನಿಶ್ಚಿತ. ಈಗಾಗಲೇ ಜಿಲ್ಲೆಯ ಶಾಸಕರು, ಉಸ್ತುವಾರಿ ಮಂತ್ರಿಗಳು ಹಾಗೂ ಇನ್ನೀತರ ಮುಖಂಡರುಗಳು ಬಿಜೆಪಿ ಅಭ್ಯರ್ಥಿಯ ಗೆಲುವಿಗಾಗಿ ಹಗಲಿರುಳು ಶ್ರಮಿಸುತ್ತಿದ್ದಾರೆ. ರಾಜ್ಯ ಹಾಗೂ ಕೇಂದ್ರ ಸರಕಾರದ ಅಭಿವೃದ್ಧಿ ಕಾರ್ಯಗಳೇ ಅಭ್ಯರ್ಥಿ ಗೆಲುವಿಗೆ ಪೂರಕವಾಗಲಿವೆ.
ಈ ವಿಧಾನ ಪರಿಷತ್ ಚುನಾವಣೆಯಲ್ಲಿ ಸ್ಥಳೀಯ ಸಂಸ್ಥೆಗಳ ಪ್ರತಿನಿಧಿಗಳು ಮತದಾರರಾಗಿದ್ದು, ಅವರೆಲ್ಲರೂ ಜಿಲ್ಲೆಯ ಅಭಿವೃದ್ಧಿಗಾಗಿ ಶ್ರಮಿಸುತ್ತಿರುವ ಬಿಜೆಪಿ ಪಕ್ಷದ ಅಭ್ಯರ್ಥಿಯ ಪರವಾಗಿ ಮತವನ್ನು ಚಲಾಯಿಸಲಿದ್ದು, ಈ ಬಾರಿ ಗಣಪತಿ ಉಳ್ವೇಕರ್ ಇವರು ಮೇಲ್ಮನೆಯನ್ನು ಪ್ರವೇಶಿಸುವುದು ನಿಶ್ಚಿತ. ಎಂದು ತಮ್ಮ ಪತ್ರಿಕಾ ಪ್ರಕಟಣೆಯ ಸ್ಪಷ್ಟನೆಯಲ್ಲಿ ತಿಳಿಸಿದ್ದಾರೆ.